ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ (Karnataka Heavy Rain Alert) ಮಳೆಯಾಗುತ್ತಿದ್ದು; ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ…
ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಉತ್ತರ ಒಳನಾಡಿನ ಹಲವೆಡೆ ಮಳೆ ಆರ್ಭಟಿಸಿದೆ. ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಬಾಗಲಕೋಟೆ, ಕೊಪ್ಪಳ, ಗದಗ ಮುಂತಾದೆಡೆ ಮಳೆಯ ಅಬ್ಬರ ಜೋರಾಗಿದೆ.
ಎಲ್ಲಮ್ಮ ಗುಡ್ಡದಲ್ಲಿ ಭಾರೀ ಮಳೆ
ಭಾರಿ ಮಳೆಯ ಅಬ್ಬರಕ್ಕೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಳ್ಳಕೊಳ್ಳಗಳು ಭರ್ತಿಯಾಗಿ ಹರಿಯುತ್ತಿದ್ದು, ಹಲವೆಡೆ ಆವಾಂತರಗಳು ಸೃಷ್ಟಿಯಾಗಿವೆ. ಬೆಳಗಾವಿ ಸವದತ್ತಿ ಎಲ್ಲಮ್ಮ ಗುಡ್ಡದಲ್ಲಿ ಭಾರಿ ನೀರು ಹರಿದು ದೇವಾಲಯ ಸುತ್ತಮುತ್ತ ಜಲಾವೃತವಾಗಿತ್ತು.
ನೂಲಹುಣ್ಣಿಮೆ ಜಾತ್ರೆ ನಡೆಯುತ್ತಿದ್ದು ಯಲ್ಲಮನ ಗುಡ್ಡಕ್ಕೆ ಮಹಾರಾಷ್ಟ್ರ, ಗೋವಾ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಭಾರಿ ಮಳೆಯಿಂದ ಗುಡ್ಡದ ಮೇಲಿನಿಂದ ನೀರು ಹರಿದುಬಂದಿದ್ದರಿಂದ ರಸ್ತೆ ಸಂಚಾರ ಸ್ಥಗಿತವಾದ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಹೋಗಲು ಭಕ್ತರು ಪರದಾಡುವಂತಾಯಿತು.

ಮೈಸೂರು, ಕಲ್ಯಾಣ ಕರ್ನಾಟಕದಲ್ಲಿ ಮಸ್ತು ಮಳೆ
ಕೋಲಾರ ಜಿಲ್ಲೆಯಲ್ಲಿ ರಾತ್ರಿ ಸುರಿದ ಮಳೆಯಿಂದ ಆವಾಂತರವಾಗಿದೆ. ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡಿದ್ದಾರೆ. ಕೆಲವು ಬಡಾವಣೆಗಳ ಜನ ಜಾಗರಣೆ ಮಾಡುವಂತಾಯಿತು.
ಮೈಸೂರಿನ ಎಚ್.ಡಿ ಕೋಟೆ ಭಾಗದಲ್ಲಿ ಬಹುತೇಕ ಕಡೆ ಭಾರಿ ಮಳೆ ಸುರಿದು ಜನರು ಪರದಾಡುವಂತಾಯಿತು. ಗದಗ ಜಿಲ್ಲೆಯಲ್ಲಿ ಬೆಣ್ಣೆಹಳ್ಳ ಉಕ್ಕಿ ಹರಿದ ಪರಿಣಾಮ ಬೆಳೆ ನಾಶವಾಗಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ.
ರಾಜ್ಯದಲ್ಲಿ ಇನ್ನು 5 ದಿನ ಮಳೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಇನ್ನು 5 ದಿನಗಳ ಕಾಲ ಜೋರು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಿನ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
Dairy Farming Subsidy- ಹಸು-ಎಮ್ಮೆ ಖರೀದಿಗೆ ₹1.25 ಲಕ್ಷ ಸಹಾಯಧನ | ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ